Showing posts with label ನೀನ್ಯಾರಿಗಾದೆಯೋ ಎಲೆ ಮಾನವ. Show all posts
Showing posts with label ನೀನ್ಯಾರಿಗಾದೆಯೋ ಎಲೆ ಮಾನವ. Show all posts

Saturday, January 24, 2009

ನೀನ್ಯಾರಿಗಾದೆಯೋ ಎಲೆ ಮಾನವ - ಜನವರಿ 2009

ಗೋವು ಮಾತನಾಡಿದಾಗ.....

ಆತ್ಮೀಯ,

ಜನ ನನ್ನನ್ನು ಅಮೃತಮಹಲ್ ಅಂತ ಗುರುತಿಸುತ್ತಾರೆ. ನಾನು ಕೆಲಸಗಾರ ತಳಿಗೆ ಸೇರಿದವ. ನಾನು ಮೂಲತಃ ಚಿಕ್ಕಮಗಳೂರು, ಹಾಸನ ಮತ್ತು ಚಿತ್ರದುರ್ಗದವ. ಮೈಸೂರು ಅರಸರು ನನ್ನನ್ನು ಅಭಿವೃದ್ಧಿಗೊಳಿಸಿದರು. ಆಗ ನನ್ನನ್ನು “ಬೆಣ್ಣೆ ಚಾವಡಿ” ಎಂಬ ಹೆಸರಿಂದ ಕರೆಯುತ್ತಿದ್ದರು. ಅನಂತರ ನನ್ನನ್ನು ಟಿಪ್ಪುಸುಲ್ತಾನ್ ಅಭಿವೃದ್ಧಿಪಡಿಸಿ “ಅಮೃತಮಹಲ್” ಅಂತ ಹೆಸರಿಟ್ಟ. ಮೈಸೂರಿನ ದಿವಾನರಾಗಿದ್ದ ಶ್ರೀಪೂರ್ಣಯ್ಯನವರು ನನ್ನನ್ನು ತಮಿಳುನಾಡಿನಲ್ಲಿ ಬೆಳೆಸಿದರು. ನನ್ನನ್ನು ತಮಿಳುನಾಡಿನ ಕೆಲವು ಕಡೆ ಇಂದಿಗೂ “ಪೂರ್ಣಯ್ಯನ ದನ” ಅಂತ ಕರೀತಾರೆ. ನಿಮ್ಮ ರೀತಿ ನನಗಿಷ್ಟವಾದ ಹೆಸರು ಇಟ್ಟುಕೊಳ್ಳುವ ಅರ್ಹತೆ ನನಗಿಲ್ಲ ಅಲ್ಲವೇ? ಹೆಸರು ಬದಲಾದರೇನಂತೆ, ನನ್ನ ವರ್ತನೆ ಬದಲಾಗಿಲ್ಲ. ನಾನೊಬ್ಬ ಸ್ವಾಮಿನಿಷ್ಟ ಮತ್ತು ಧೈರ್ಯಶಾಲಿ.

ಅದಕ್ಕಾಗಿಯೇ ನನ್ನನ್ನು ಯುದ್ಧದಲ್ಲಿ ಬಳಸುತ್ತಿದ್ದರೂ ಅನ್ಸುತ್ತೆ. ನನ್ನ ಕೋಡು ಉದ್ದವಿದೆ ಎಂದು ಅದಕ್ಕೆ ಬೆಂಕಿ ಹಚ್ಚಿ ವೈರಿಗಳತ್ತ ನನ್ನ ಓಡಿಸುತ್ತಿದ್ದರು. ಪರಿಸ್ಥಿತಿಯ ಅರಿವಿದ್ದರೂ ನಾನೊಬ್ಬ ಅಸಹಾಯಕ ನೋಡಿ. ಎಷ್ಟಾದರೂ ನಾನೊಬ್ಬ ಮೂಕ ಪ್ರಾಣಿ ಅಲ್ಲವೇ? ನನ್ನ ಕೂಗು ಅವರಿಗೆಲ್ಲಿ ಅರ್ಥವಾಗಬೇಕು ಹೇಳಿ. ಯುದ್ಧಕಾಲದಲ್ಲಿ ಸಾಮಾನು - ಸರಂಜಾಮು ಸಾಗಿಸಲು ನನ್ನನ್ನು ಉಪಯೋಗಿಸುತ್ತಿದ್ದರು. ದಿನಗಟ್ಟಲೇ ಆಹಾರ ಮತ್ತು ನೀರನ್ನು ಸೇವಿಸದೇ ನಾನಿರುತ್ತೇನೆ. ನಾನು ಹಾಲು ಜಾಸ್ತಿ ನೀಡದಿದ್ದರೂ ಶ್ರಮದ ಕೆಲಸಕ್ಕೆ ಉಪಯೋಗವಾಗುತ್ತೇನೆ.

ಹಿಂದೆ ನನ್ನ ಸಂವರ್ಧನೆಗಾಗಿ ಕಾವಲು ಭೂಮಿಯನ್ನು ಬಿಟ್ಟಿದ್ದರು. ಇತ್ತೀಚಿನ ಕೆಲವು ಘಟನೆಯಿಂದ ನನ್ನ ಹೆಸರು ಸ್ವಲ್ಪಮಟ್ಟಿಗೆ ನಿನಗೆ ಪರಿಚಯವಾಗಿರಬಹುದು. ನನ್ನ ನಿರ್ವಹಣೆಯನ್ನು ಸರಕಾರ ಶ್ರೀರಾಮಚಂದ್ರಾಪುರ ಮಠಕ್ಕೆ ವಹಿಸುವುದರಲ್ಲಿತ್ತು. ಅದರ ವಿರುದ್ಧ ನಿನ್ನ ಸಹೋದರರು ಕೂಗಾಡಿದರು, ಪ್ರತಿಭಟಿಸಿದರು. ಅದರ ಫಲವೇನಾಯಿತು? ಅಂತ ನಿನಗೆ ತಿಳಿದಿರಬಹುದು.

ಈಗ ನನ್ನನ್ನು ನೋಡಿಕೊಳ್ಳಲು ಯಾರೂ ಇಲ್ಲ. ನಾನು ಬಲಿಪಶುವಾದೆ.

ಹೇಳು ಮಾನವ ಇದು ನ್ಯಾಯವೇ.....
ಪ್ರತಿಭಟಿಸಲು ನಾನು ಅಸಹಾಯಕ. ನೀನೂ.....??


~~~~~~~~~~~~~~~~~~~~~~~~~~~~~~~~~~~~~~
ಮಾನವನ ಸ್ವಾರ್ಥದ ಅಟ್ಟಹಾಸದಲ್ಲಿ ಸಿಕ್ಕಿ ನಲುಗುತ್ತಿರುವ ಮೂಕ ಪ್ರಾಣಿ ಗೋವು ಮಾತನಾಡುವ ಲೇಖನ ಮಾಲಿಕೆ "ನೀನ್ಯಾರಿಗಾದೆಯೋ ಎಲೆ ಮಾನವ"
ಈ ಲೇಖನ ಮಾಲಿಕೆ ಶ್ರೀರಾಮಚಂದ್ರಾಪುರ ಮಠದ "
ಧರ್ಮಭಾರತೀ" ಮಾಸ ಪತ್ರಿಕೆಯಲ್ಲಿ ಡಿಸೆಂಬರ್ ನಿಂದ ಪ್ರಾರಂಭವಾಗಿದೆ.
ಈ ಲೇಖನಮಾಲಿಕೆಯನ್ನು ಧರ್ಮಭಾರತೀ ಯ ಅಂತರಜಾಲ ತಾಣದಲ್ಲಿ ಓದಬಹುದು

Saturday, December 6, 2008

ನೀನ್ಯಾರಿಗಾದೆಯೋ ಎಲೆ ಮಾನವ

ಗೋವು ಮಾತನಾಡಿದಾಗ.....

ಆತ್ಮೀಯ,

ಬಹಳ ದಿನಗಳಿಂದ ಈ ಪತ್ರ ಬರೆಯಬೇಕೆಂದಿದ್ದೆ. ಇಂದು ಬರೆಯುತ್ತಿರುವೆ.

ನಾನೇನು ತಪ್ಪು ಮಾಡಿದೆ ನಿನಗೆ? ನಿನ್ನನ್ನು ಎಂದಾದರೂ ದೂಷಿಸಿದ್ದೆನಾ? ಅಥವಾ ನಿನ್ನ ಕುಟುಂಬಕ್ಕೇನಾದರೂ ದ್ರೋಹ ಮಾಡಿದ್ದೆನಾ? ಅಮ್ಮನ ಎದೆ ಹಾಲಿನ ಅನಂತರ ನೀನು ಕುಡಿದಿದ್ದು ನನ್ನ ಹಾಲಲ್ಲವೇ? ಅಂದಿನಿಂದ ಇಂದಿನವರೆಗೆ ನಾನೆಂದೂ ನಿನಗೆ ಮೋಸ ಮಾಡಿಲ್ಲ. ಹಾಗಿದ್ದಾಗ ನನ್ನ ಮೇಲೆ ನಿನಗೇಕೆ ಕೋಪ, ಮತ್ಸರ!

ಹಾಲು ಬೇಕೆಂದಾಗ ಏನು ಮಾಡುತಿದ್ದೆ ನೀನು?
ನನ್ನ ಮುದ್ದು ಕರುವಿಗೆ ನಾನು ಹಾಲುಣಿಸದಂತೆ ಮಾಡಿ ನನ್ನ ಹಾಲನ್ನು ಕರೆದು ನೀನು ನಿನ್ನವರಿಗೆ ಉಣಿಸಿದೆ. “ಅಮ್ಮ ನನಗೆ ಹಾಲು ಬೇಕು, ಕೊಡು” ಅಂತ ಕರು ಸಂಜ್ಞೆ ಮಾಡಿದರೂ ಅದನ್ನು ನೋಡಿ ನಾನು ಅಸಹಾಯಕಳಾಗಿದ್ದೆ. “ಮಗು, ಎಲ್ಲದಕ್ಕೂ ನಾವು ಪಡೆದುಕೊಂಡು ಬರಬೇಕು” ಎಂದು ಕರುವಿಗೆ ಸಮಾಧಾನ ಮಾಡುತ್ತಿದ್ದೆ. ಕೆಚ್ಚಲು ಗಾಯವಾದಾಗ ನಾನು ಒದ್ದಿದ್ದು ನಿಜ. ನನಗೆ ನೋವಾಗುವುದಿಲ್ಲವೇ? ಅದನ್ನೇ ಕಾರಣವಾಗಿಟ್ಟುಕೊಂಡು ನೀನು ನನ್ನ ಕಾಲುಗಳನ್ನು ಕಟ್ಟಿ ಹಾಲು ಕರೆದಿಲ್ಲವೇ? ನನ್ನ ನೋವು ನಿನಗರ್ಥವಾಗಲಿಲ್ಲವೇ?

ಕಂಡ ಕಂಡವರ ಮೇಲೆ ನಿನ್ನ ಕಾಮುಕ ದೃಷ್ಟಿಯಿಟ್ಟ ನೀನು ನನಗೆ ನನ್ನಷ್ಟಕ್ಕೆ ಗರ್ಭಧರಿಸಲೂ ಬಿಡಲಿಲ್ಲ. ನನ್ನ ಪ್ರಾಣಗಳಾದ ನನ್ನ ಕರುಗಳನ್ನು ದುಡ್ಡಿನ ಆಸೆಗೆ ನೀನು ಮಾರಿದೆ. ಸ್ವತಂತ್ರವಾಗಿ ಓಡಾಡುವ ಹಕ್ಕನ್ನೂ ಕಸಿದುಕೊಂಡೆ. ಯಾಕೆ ಕೋಪ ನಿನಗೆ? ಹಾಲು ಕೊಡುವುದಿಲ್ಲ ಎಂಬ ಏಕೈಕ ಕಾರಣಕ್ಕೆ ನನ್ನನ್ನು ಕಸಾಯಿಖಾನೆಗೆ ತಳ್ಳಿದೆ. ನನ್ನ ಕೋಡು ಉದ್ದವಿತ್ತು, ಅದಕ್ಕೆ ಬೆಂಕಿ ಹಚ್ಚಿ ವೈರಿಗಳ ಮೇಲೆ ಆಕ್ರಮಣ ಮಾಡಲು ನನ್ನನು ಉಪಯೋಗಿಸಿದೆ. ನಿನ್ನ ಭಯದಿಂದ ನಾನು ಹಾಗೆ ಓಡಿದೆ. ಓಡುವಾಗ ಕೊಂಬಿನಲ್ಲಿದ್ದ ಬೆಂಕಿ ನನ್ನ ಮೈಗೂ ತಾಗಿ ಸುಟ್ಟಿತ್ತು. ವೈರಿಗಳು ನನ್ನ ಇರಿದಿದ್ದರು. ನಿನ್ನನ್ನು ಕಾಪಾಡಿಕೊಳ್ಳಲು ನನ್ನನ್ನು ನೀನು ಉಪಯೋಗಿಸಿದ್ದೆ. ನಿನಗೆ ಕರುಣೆಯಿಲ್ಲವೇ?

ನಿನಗಾಗಿ ನನ್ನ ಜೀವನ ತೆತ್ತೆ. ಹೇಳು ಮಾನವ ಹೇಳು.
ನನಗೆ ಉತ್ತರಿಸು. ನಿನ್ನ ಆತ್ಮವನ್ನೊಮ್ಮೆ ಪ್ರಶ್ನಿಸು....
~~~~~~~~~~~~~~~~~~~~~~~~~~~~~~~~~~~~~~
ಮಾನವನ ಸ್ವಾರ್ಥದ ಅಟ್ಟಹಾಸದಲ್ಲಿ ಸಿಕ್ಕಿ ನಲುಗುತ್ತಿರುವ ಮೂಕ ಪ್ರಾಣಿ ಗೋವು ಮಾತನಾಡುವ ಲೇಖನ ಮಾಲಿಕೆ "ನೀನ್ಯಾರಿಗಾದೆಯೋ ಎಲೆ ಮಾನವ"

ಈ ಲೇಖನ ಮಾಲಿಕೆ ಶ್ರೀರಾಮಚಂದ್ರಾಪುರ ಮಠದ "ಧರ್ಮಭಾರತೀ" ಮಾಸ ಪತ್ರಿಕೆಯಲ್ಲಿ ಡಿಸೆಂಬರ್ ನಿಂದ ಪ್ರಾರಂಭವಾಗಿದೆ. ಬರೆಯಲು ಸ್ಪೂರ್ತಿಸಿದ ಮತ್ತು ಆಶೀರ್ವದಿಸಿದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರಿಗೆ ಚಿರಋಣಿ. ಬರವಣಿಗೆಯನ್ನು ತಿದ್ದಿ ತೀಡುತ್ತಿರುವ ಮತ್ತು ಧರ್ಮಭಾರತೀ ಮಾಸಪತ್ರಿಕೆಯಲ್ಲಿ ಲೇಖನ ಬರೆಯಲು ಅವಕಾಶ ನೀಡಿದ ಪತ್ರಿಕೆಯ ಪ್ರಧಾನ ಸಂಪಾದಕರಾದ ಶ್ರೀ ಜಗದೀಶ ಶರ್ಮಾರವರಿಗೆ ಪ್ರೀತಿಪೂರ್ವಕ ಧನ್ಯವಾದಗಳು.

ಈ ಲೇಖನಮಾಲಿಕೆಯನ್ನು ಧರ್ಮಭಾರತೀ ಯ ಅಂತರಜಾಲ ತಾಣದಲ್ಲಿ ಓದಬಹುದು